31/07/2026
ಕಲಬುರ್ಗಿ ಜಿಲ್ಲೆ, ಅಫಜಲಪುರ ತಾಲೂಕಿನ ಕರಜಗಿ ಮುರಾರ್ಜಿ ವಸತಿ ಶಾಲೆಯಲ್ಲಿ ಕಲುಷಿತ ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಯನ್ನು , ತಪ್ಪಿತಸ್ಥ ಅಧಿಕಾರಿಗಳು ಹಾಗೂ ನಿರ್ಲಕ್ಷ್ಯ ವಹಿಸಿದ ವೈದ್ಯಾಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಕಲ್ಯಾಣ ಜನಪರ ವೇದಿಕೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಬೆಳಗಿನ ಉಪಹಾರ ಸೇವಿಸಿದ ಹಲವು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿರುತ್ತಾರೆ. ಈ ದುರಂತ ಘಟನೆಯನ್ನು ನಮ್ಮ ಕಲ್ಯಾಣ ಜನಪರ ವೇದಿಕೆಯು ತೀವ್ರವಾಗಿ ಖಂಡಿಸುತ್ತದೆ.
ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡಿದ ಈ ಘಟನೆಗೆ ಕಾರಣರಾದ ಹಾಗೂ ಕಳಪೆ ಮಟ್ಟದ/ಹಾಳಾದ ಆಹಾರ ನೀಡಿರುವ ಸಂಬಂಧಪಟ್ಟ ವಸತಿ ಶಾಲೆಯ ಪ್ರಾನ್ಶುಪಾಲರು ನಿಲಯ ಪಾಲಕರು ಹಾಗೂ ಅಡುಗೆ ಸಿಬ್ಬಂದಿಯನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು
ಅಲ್ಲದೆ, ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿರುವ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ನಡೆಗೆ ವಿದ್ಯಾರ್ಥಿಗಳ ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡಳಿತ ಮಂಡಳಿ ಹಾಗೂ ವೈದ್ಯರ ಈ ಬೇಜವಾಬ್ದಾರಿತನವು ಅಕ್ಷಮ್ಯ ಅಪರಾಧವಾಗಿದೆ.
ಕಳಪೆ ಉಪಹಾರ ಪೂರೈಕೆಗೆ ನೇರ ಕಾರಣರಾದ ವಸತಿ ಶಾಲೆಯ ಪ್ರಾನ್ಶುಪಾಲರು, ನಿಲಯ ಪಾಲಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಿ, ಅವರ ವಿರುದ್ಧ ಇಲಾಖಾ ತನಿಖೆ ನಡೆಸಬೇಕು.
ಮತ್ತು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ತೋರಿದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಸೂಕ್ತ ಶಿಸ್ತುಕ್ರಮ ಜರುಗಿಸಬೇಕು.
ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ತಕ್ಷಣವೇ ಉತ್ತಮ ದರ್ಜೆಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಬೇಕು ಹಾಗೂ ಅದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು.
ಜಿಲ್ಲೆಯ ಎಲ್ಲಾ ವಸತಿ ಶಾಲೆಗಳಲ್ಲಿ ಸರಬರಾಜಾಗುವ ಆಹಾರದ ಗುಣಮಟ್ಟವನ್ನು ನಿಯಮಿತವಾಗಿ ತಪಾಸಣೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಮೇಲ್ಕಂಡ ಆಗ್ರಹಗಳನ್ನು ತಕ್ಷಣವೇ ಈಡೇರಿಸಬೇಕು. ತಪ್ಪಿದಲ್ಲಿ, ಕಲ್ಯಾಣ ಜನಪರ ವೇದಿಕೆಯ ವತಿಯಿಂದ ಜಿಲ್ಲಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ.
ತಮ್ಮ ನಂಬುಗೆಯ,
ನಾಗರಾಜ ಘೋಡಕೆ
ಜಿಲ್ಲಾಧ್ಯಕ್ಷರು
ಕಲ್ಯಾಣ ಜನಪರ ವೇದಿಕೆ, ಕಲಬುರಗಿ